ಶಿವಮೊಗ್ಗ, ಫೆ.22:
ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ. ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ಶಿಕಾರಿಪುರ ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಪಂದಿಸಿದ ಜಿಲ್ಲಾಧಿಕಾರಿ
ಬೆಳಿಗ್ಗೆ 11ಗಂಟೆಗೆ ಸರಿಯಾಗಿ ಗ್ರಾಮ ಪ್ರವೇಶಿಸಿದ ಜಿಲ್ಲಾಧಿಕಾರಿ ಅವರನ್ನು ಗ್ರಾಮಸ್ಥರು, ಡೊಳ್ಳು, ಪಟಾಕಿಯೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ಗ್ರಾಮದ ಶಾಲೆಗೆ ಕರೆ ತಂದರು. ಶಾಲೆಯ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ಸಾಮಾನ್ಯ ಆರೋಗ್ಯ ತಪಾಸಣೆ ಮಾತ್ರವಲ್ಲದೆ ಕಣ್ಣು, ಕಿವಿ, ಚರ್ಮ ಇತ್ಯಾದಿ ತಪಾಸಣೆಗೂ ಇಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ತಾಲೂಕಿನ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.
ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ. ಇದರೊಂದಿಗೆ ಪಂಚಾಯತ್ರಾಜ್ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿ ಹೋಬಳಿಯಲ್ಲಿರುವ ಗ್ರಾಮಗಳ ಸಮಸ್ಯೆಗಳು ಬಹುತೇಕ ಒಂದೇ ರೀತಿಯಾಗಿರುತ್ತದೆ. ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರೂ, ಆಯಾ ಹೋಬಳಿಯ ಸಮಸ್ಯೆಗಳನ್ನು ಅರಿಯಲು ಇದರಿಂದ ಸಾಧ್ಯವಾಗುತ್ತದೆ. ಹೋಬಳಿ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಾಜರಿರುವುದರಿಂದ ಸಂಬಂಧಿಸಿದ ಎಲ್ಲಾ ಗ್ರಾಮಗಳ ಸಮಸ್ಯೆಗಳ ಪರಿಹಾರ ಸಾಧ್ಯವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಸಾಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಅತ್ಯುತ್ತಮ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಶಿಕ್ಷಕರು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಆ ಮೂಲಕ ಎಸ್ಎಸ್ಎಲ್ಸಿ ಮತ್ತು ಪಿಯುನಲ್ಲಿ ಉತ್ತಮ ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಎಲ್ಲಾ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಶುದ್ಧ ಮನಸ್ಸಿನಿಂದ ಕರ್ತವ್ಯ ನಿರ್ವಹಿಸಿ ಬಡವರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಅರ್ಜಿಗಳನ್ನು ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಂತದಲ್ಲಿಯೇ ವಿಲೇವಾರಿ ಮಾಡಿದರೆ ಜಿಲ್ಲಾಧಿಕಾರಿಗಳು ಗ್ರಾಮ ಮಟ್ಟಕ್ಕೆ ಬಂದು ಅರ್ಜಿಗಳನ್ನು ಸ್ವೀಕರಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು.
ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳದಲ್ಲಿಯೇ ಕಾರ್ಡ್ ಮುದ್ರಿಸಿ ನೀಡುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಶಾಲಾ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ೬ಮತ್ತು೭ನೇ ತರಗತಿಯ ಮಕ್ಕಳೊಂದಿಗೆ ಶಿಕ್ಷಕರಾಗಿ ಬೆರೆತರು. ಗಣಿತ, ಇಂಗ್ಲಿಷ್, ಕನ್ನಡ ವಿಷಯದ ಬಗ್ಗೆ ಮಕ್ಕಳ ಸಾಮರ್ಥ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು ಗಣಿತದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಶಿಕಾರಿಪುರ ತಹಶೀಲ್ದಾರ್ ಕವಿರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©